ಚಿಕ್ಕಮಗಳೂರು: ಇಲ್ಲಿನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೀರಿನ ಸಮಸ್ಯೆ ಬಗೆಹರಿಸಲು ಮಳೆ ನೀರಿನ ಕೊಯ್ಲು ಯೋಜನೆಯನ್ನು ೩.೫ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ತಿಳಿಸಿದರು.
ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿ ಅಲ್ಲಿನ ಅಭಿವೃದ್ಧಿ ವೀಕ್ಷಣೆ ಮಾಡಿ ಮಾತನಾಡಿ, ನೀರಿನ ಸಮಸ್ಯೆ ಬಗ್ಗೆ ಈಗಾಗಲೇ ಕ್ಷೇತ್ರದ ಶಾಸಕ ಎಚ್.ಡಿ.ತಮ್ಮಯ್ಯ ಹಾಗೂ ಸಂಸ್ಥೆಯ ನಿರ್ದೇಶಕರು ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸಂಸ್ಥೆಯ ಕಾಮಗಾರಿ ಶೇ.೯೮ ರಷ್ಟು ಪೂರ್ಣಗೊಂಡಿದೆ , ಬಹು ನಿರೀಕ್ಷಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ತಾಯಿ-ಮಗುವಿನ ಆರೈಕೆ ಕೇಂದ್ರದ ಕಾಮಗಾರಿ ಶೇ.೭೫ ರಷ್ಟು ಪೂರ್ಣಗೊಂಡಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಚ್.ಡಿ.ತಮ್ಮಯ್ಯ, ಜಿ.ಎಚ್.ಶ್ರೀನಿವಾಸ್, ಶಿವಮೊಗ್ಗ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಡೀನ್ ಡಾ.ಹರೀಶ್, ಜಿಲ್ಲಾ ಸರ್ಜನ್ ಡಾ.ಮೋಹನ್ ಕುಮಾರ್ ಇದ್ದರು.
