ಚಿಕ್ಕಮಗಳೂರು : ಜಿಲ್ಲೆಯ ಅಮೃತಮಹಲ್ ಕಾವಲ್ನ ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಒತ್ತುವರಿಯಾಗಿರುವ ಭೂಪ್ರದೇಶವನ್ನು ತೆರವುಗೊಳಿಸುವಂತೆ ಹಿಂದಿನ ಸಭೆಯಲ್ಲಿ ಸೂಚಿಸಿದ್ದರೂ ಇದುವರೆಗೆ ಕ್ರಮ ಕೈಗೊಳ್ಳದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಜಂಟಿ ಸರ್ವೇ ನಡೆಸಿ ಒತ್ತುವರಿ ತೆರವುಗೊಳಿಸಿ ಅಮೃತಮಹಲ್ ಕಾವಲ್ ಪ್ರದೇಶವನ್ನು ವಶಕ್ಕೆ ಪಡೆಯುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.೬೦ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಅನುದಾನಿತ ಶಾಲೆಗಳ ವಿರುದ್ಧ ಕ್ರಮ ಜರುಗಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಾಹಿತಿ ನೀಡಿ, ಶೇ.೬೦ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಜಿಲ್ಲೆಯ ಅನುದಾನಿತ ಶಾಲೆಗಳಿಗೆ ಕಾರಣ ಕೇಳಿ ನೋಟಿಸು ಜಾರಿ ಮಾಡಲಾಗಿದೆ ಮತ್ತು ಶೇ.೫೦ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ೧೩ ಅನುದಾನಿತ ಪ್ರೌಢಶಾಲೆಗಳ ಮಾನ್ಯತೆಯನ್ನು ರದ್ದುಪಡಿಸುವ ಕುರಿತು ಆಡಳಿತ ಮಂಡಳಿಗೆ ನೋಟಿಸು ಜಾರಿ ಮಾಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಮಾಹಿತಿ ನೀಡಿ, ಜಿಲ್ಲೆಯಲ್ಲಿ ಜೂನ್ನಿಂದ ಇದುವರೆಗೆ ಆಗಿರುವ ಮಳೆ-ಗಾಳಿಯಿಂದ ಜಿಲ್ಲಾದ್ಯಂತ ೧೨೭೩ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮೆಸ್ಕಾಂಗೆ ೨೧೭.೫೧ ಲಕ್ಷ ರೂ. ನಷ್ಟ ಸಂಭವಿಸಿರುವುದಾಗಿ ತಿಳಿಸಿದರು.
ಚಿಕ್ಕಮಗಳೂರಲ್ಲಿ ೫೨೩, ಮೂಡಿಗೆರೆಯಲ್ಲಿ ೭೯, ಕಳಸ ೮೭, ಕಡೂರು ೨೨, ತರೀಕೆರೆ ೩೩, ಎನ್.ಆರ್.ಪುರ ೨೫೦, ಕೊಪ್ಪ ೧೪೫ ಹಾಗೂ ಶೃಂಗೇರಿಯಲ್ಲಿ ೯೭ ವಿದ್ಯುತ್ ಕಂಬಗಳನ್ನು ಬದಲಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು ೧೧.೪೯ ಕಿ.ಮೀ.ನಷ್ಟು ರಾಜ್ಯ ಹೆದ್ದಾರಿ ಹಾನಿ ಉಂಟಾಗಿದ್ದು, ೬.೧೫ ಕೋಟಿ ರೂ. ನಷ್ಟ ಸಂಭವಿಸಿದೆ. ೧೦.೯೭ ಕಿ.ಮೀ.ನಷ್ಟು ಜಿಲ್ಲಾ ಮುಖ್ಯ ರಸ್ತೆ ಹಾನಿಗೀಡಾಗಿ ೧೯೫೯ ಲಕ್ಷ ರೂ. ನಷ್ಟ ಸಂಭವಿಸಿದೆ. ಒಟ್ಟು ೧೬ ಸೇತುವೆಗಳು ಹಾನಿಗೊಳಗಾಗಿವೆ. ಒಟ್ಟಾರೆ ರಸ್ತೆ ಮತ್ತು ಸೇತುವೆ ಹಾನಿಯಿಂದಾಗಿ ೪೫೨೫ ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತಿಳಿಸಿದರು. ಜಿಲ್ಲೆಯ ೫೨೫.೩೬ ಕಿ.ಮೀ. ಗ್ರಾಮೀಣ ರಸ್ತೆಗಳು ಹಾನಿಯಾಗಿವೆ. ೨೭೮೮ ಲಕ್ಷ ರೂ. ನಷ್ಟ ಸಂಭವಿಸಿದೆ. ಗ್ರಾಮೀಣ ಭಾಗದಲ್ಲಿ ೨೮ ಸೇತುವೆ ಮತ್ತು ಕಲ್ವರ್ಟ್ಗಳು ಹಾನಿಗೀಡಾಗಿದ್ದು, ೪೪೦ ಲಕ್ಷ ರೂ. ನಷ್ಟವಾಗಿದೆ. ಇದೇ ಅವಧಿಯಲ್ಲಿ ಒಟ್ಟು ೧೧ ಸರ್ಕಾರಿ ಶಾಲಾ ಕಟ್ಟಡಗಳು ಮಳೆಯಿಂದ ಹಾನಿಗೀಡಾಗಿದ್ದು ೨೨ ಲಕ್ಷ ರೂ. ನಷ್ಟ ಸಂಭವಿಸಿದೆ ಎಂದರು.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಎರಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಾನಿಯಾಗಿ ೪ ಲಕ್ಷ ರೂ. ನಷ್ಟವಾಗಿದೆ. ಒಟ್ಟಾರೆ ಸರ್ಕಾರಿ ಕಟ್ಟಡಗಳ ಹಾನಿಯಿಂದ ೨೬ ಲಕ್ಷ ರೂ. ನಷ್ಟವುಂಟಾಗಿದೆ ಎಂದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
