ಬೆಂಗಳೂರು : ಅರಣ್ಯ ಕಾಯಿದೆ 1963ರ ಸೆಕ್ಷನ್ 4ರಡಿ ಅಧಿಸೂಚನೆ ಆಗುವ ಮುನ್ನ ಮಂಜೂರಾಗಿರುವ ಭೂಮಿಯನ್ನು ಅರಣ್ಯದಿಂದ ಕೈಬಿಡಲು ಸರ್ಕಾರಕ್ಕೆ ಅವಕಾಶವಿದ್ದು, ಸುಪ್ರೀಂಕೋರ್ಟ್ ಗೆ ವಿಶೇಷ ಪ್ರಸ್ತಾವನೆ ಸಲ್ಲಿಸಲಾಗುವುದು.
ಅಧಿಸೂಚನೆಯ ನಂತರ 30-40 ವರ್ಷಗಳಿಂದ ಮನೆಕಟ್ಟಿರುವ, ಉಳಿಮೆ ಮಾಡುತ್ತಿರುವ ಜನರಿಗೆ ನ್ಯಾಯ ಕೊಡಿಸಲಾಗುವುದು ಎಂದು ಕೇಂದ್ರ ಹಾಗೂ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶಾಸಕರು ಮತ್ತು ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ವಸತಿ ಪ್ರದೇಶ, ಪಟ್ಟಾಭೂಮಿ ಇತರೆ ಜನವಸತಿ ಪ್ರದೇಶವನ್ನು ಅರಣ್ಯ ವ್ಯಾಪ್ತಿಯಿಂದ ಕೈಬಿಡುವಂತೆ ಸುಪ್ರೀಂಕೋರ್ಟ್ ಮತ್ತು ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಪರಿಭಾವಿತ ಅರಣ್ಯ ಹಾಗೂ ಸೆಕ್ಷನ್ 4 ಅಧಿಸೂಚನೆ ನಂತರ ಮಂಜೂರಾಗಿರುವ ಜಮೀನಿಗೆ ಪರ್ಯಾಯವಾಗಿ ಬೇರೆಡೆ ಲಭ್ಯವಿರುವ ಅರಣ್ಯೇತರ ಭೂಮಿ ನೀಡಲಾಗುವುದು ಎಂದರು
ಹಲವು ಪ್ರಕರಣಗಳಲ್ಲಿ ಸೆಕ್ಷನ್ 4 ಅಧಿಸೂಚನೆ ಆಗಿ 60-70 ವರ್ಷವಾಗಿದ್ದರೂ ಇನ್ನೂ ಸೆಕ್ಷನ್ 17 ಆಗಿರುವುದಿಲ್ಲ. 1980ರ ಅರಣ್ಯ ಸಂರಕ್ಷಣಾ ಕಾಯಿದೆ ಜಾರಿ ಬಳಿಕ ಈಗ ಅಂತಹ ಅರಣ್ಯ ಕೈಬಿಡುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ಕೇಂದ್ರ ಹಾಗೂ ಸುಪ್ರೀಂಕೋರ್ಟ್ ಗೆ ಮನವಿ ಮಾಡುವುದು ಅನಿವಾರ್ಯ ಎಂದು ತಿಳಿಸಿದರು.
ಚಿಕ್ಕಮಗಳೂರು ಜಿಲ್ಲೆ ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿದ್ದು, ಇಲ್ಲಿ ಸಮೃದ್ಧ ಕಾನನ ಪ್ರದೇಶವಿದೆ. ಇಲ್ಲಿ ಒಂದೇ ಸರ್ವೆ ನಂಬರ್ ನಲ್ಲಿ 300-400 ಎಕರೆ ಜಮೀನಿದ್ದು, ಜಂಟಿ ಸರ್ವೆ ಆಗದ ಕಾರಣ ಗೊಂದಲ ಉಂಟಾಗಿದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಅರಣ್ಯ ಮತ್ತು ಕಂದಾಯ ಜಮೀನಿನ ಜಂಟಿ ಸರ್ವೆ ಮಾಡಿ ಸಮಸ್ಯೆಯನ್ನು ಶೀಘ್ರ ಇತ್ಯರ್ಥ ಪಡಿಸಲು ಪ್ರಯತ್ನಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಪರಿಭಾವಿತ ಅರಣ್ಯ (ಡೀಮ್ಡ್) ಎಂದು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿರುವ ಸರ್ವೆ ನಂಬರ್ ನಲ್ಲಿ ಮನೆಗಳು, ಸರ್ಕಾರಿ ಶಾಲೆಗಳು, ಸರ್ಕಾರಿ ಕಟ್ಟಡ, ಪಟ್ಟಾಭೂಮಿ ಇದೆ. ಈಗ ಅಂತಿಮವಾಗಿ ಸುಪ್ರೀಂಕೋರ್ಟ್ ಗೆ ವರದಿ ಸಲ್ಲಿಸುವ ಅವಕಾಶ ದೊರೆತಿದೆ ಎಂದು ತಿಳಿಸಿದರು.
ಸಮರ್ಪಕವಾಗಿ ಸರ್ವೆ ನಡೆಸಿ ಕೈಬಿಡಲು ಅರ್ಹವಾದ ಜಮೀನಿನ ಪ್ರಮಾಣ ನಿರ್ಧರಿಸಿ, ಅದಕ್ಕೆ ಪರ್ಯಾಯವಾಗಿ ಬೇರೆ ಕಡೆ ಕಂದಾಯ ಭೂಮಿ ನೀಡುವುದಾಗಿ ಮತ್ತು ಅಲ್ಲಿ ಅರಣ್ಯ ಬೆಳೆಸುವುದಾಗಿ ತಿಳಿಸಿ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಬಹುದಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
2022ರಲ್ಲಿ ಸುಪ್ರೀಂಕೋರ್ಟ್ ಗೆ ಸಲ್ಲಿಸಲಾಗಿರುವ ಡೀಮ್ಡ್ ಅರಣ್ಯ ಕುರಿತ ಪ್ರಮಾಣಪತ್ರ ಸಾರ್ವಜನಿಕರಿಗೆ ಲಭ್ಯವಾಗುವಂತೆ ಇಲಾಖೆಯ ಅಧಿಕೃತ ಅಂತರ್ಜಾಲ ತಾಣದಲ್ಲಿ ಅಪ್ ಲೋಡ್ ಮಾಡುವಂತೆ ಸಹ ಅರಣ್ಯ ಸಚಿವರು ಸೂಚನೆ ನೀಡಿದರು.
ಹಾಸನ ಜಿಲ್ಲೆಯ ಅರಸೀಕೆರೆ ವ್ಯಾಪ್ತಿಯಲ್ಲಿನ ಕರಡಿ ಧಾಮದ ಸುತ್ತ ಪ್ರಸ್ತುತ 10 ಕಿ.ಮೀ. ಬಫರ್ ವಲಯ ಎಂದು ಘೋಷಿಸಲಾಗಿರುವ ಕಾರಣ ಗಡಿ ಭಾಗದ ಚಿಕ್ಕಮಗಳೂರು ರೈತರೂ ಸಂಕಷ್ಟ ಎದುರಿಸುವಂತಾಗಿದೆ ಎಂದು ಶಾಸಕರು ಅಳಲು ತೋಡಿಕೊಂಡರು.
ಈ ಮನವಿಗೆ ಸ್ಪಂದಿಸಿದ ಸಚಿವರು, ಈ ಮಿತಿಯನ್ನು 1 ಕಿ.ಮೀ.ಗೆ ಇಳಿಕೆ ಮಾಡಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಶೀಘ್ರವೇ ಈ ಸಮಸ್ಯೆ ಬಗೆಹರಿಯುತ್ತದೆ ಎಂದು ಭರವಸೆ ನೀಡಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಅರಣ್ಯ ಕಾಯಿದೆ ಸೆಕ್ಷನ್ 4 ಹಾಗೂ ಪರಿಭಾವಿತ ಅರಣ್ಯ ಅಧಿಸೂಚನೆಯಿಂದ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆ ಕುರಿತಂತೆ ಸಭೆ ಕರೆದು ಚರ್ಚಿಸಿದರು. ಶಾಸಕರಾದ ರಾಜೇಗೌಡ, ತಮ್ಮಣ್ಣ, ನಯನ ಮೋಟಮ್ಮ, ಶ್ರೀನಿವಾಸ್ ಮತ್ತು ಆನಂದ್ ,
ಅರಣ್ಯಪಡೆ ಮುಖ್ಯಸ್ಥ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಸುಭಾಷ್ ಮಾಲ್ಕಡೆ, ಪಿಸಿಸಿಎಫ್ ಬಿ.ಪಿ. ರವಿ, ಬಿಸ್ವಜಿತ್ ಮಿಶ್ರಾ, ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಪಾಲ್ಗೊಂಡಿದ್ದರು.
